ಇಷ್ಟು ದಿನ ಏನು ಮಾಡುತ್ತಿದ್ದಿರಿ ಸಿಎಂ ಪ್ರಶ್ನೆ?
ಬಲ್ಡೋಟಾ ಕಂಪನಿ ಓಡಿವುದಕ್ಕೆ ಮೊದಲ ಹೆಜ್ಜೆ ಸಕ್ಸಸ್: ಕೆಲಸ ನಿಲ್ಲಿಸಲು ಸಿಎಂ ಸೂಚನೆ
badalavane daily paper, aksharatvkannada
ಕೊಪ್ಪಳ: ಬಲ್ಡೋಟಾ ಸ್ಟೀಲ್ ಮತ್ತು ಪವರ್ ಲಿಮಿಟೆಡ್ (ಬಿಎಸ್ಪಿಎಲ್) ಕಂಪನಿಯು ೧.೫೦ ಕೋಟಿ ಟನ್ ಉತ್ಪಾದನಾ ಸಾಮರ್ಥ್ಯದ ಇಂಟಿಗ್ರೇಟೆಡ್ ಉಕ್ಕಿನ ಕಾರ್ಖಾನೆಯನ್ನು ಜಿಲ್ಲಾ ಕೇಂದ್ರಕ್ಕೆ ಹೊಂದಿಕೊಂಡೇ ಸ್ಥಾಪನೆ ಮಾಡಲು ಮುಂದಾಗಿದ್ದಕ್ಕೆ ಜನರ ವಿರೋಧವಿದೆ, ಇಂಥಹ ಜನವಿರೋಧಿ ಕೆಲಸ ಮಾಡಲು ಆಗುವದಿಲ್ಲ ಆದ್ದರಿಂದ ಕಾರ್ಖಾನೆಯವರು ಮಾಡುತ್ತಿರುವ ಸಿದ್ಧತಾ ಕಾರ್ಯಗಳನ್ನು ತಕ್ಷಣವೇ ನಿಲ್ಲಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಿಲ್ಲಾಧಿಕಾರಿ ನಲಿನ್ ಅತುಲ್ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ರಾಮ್ ಎಲ್. ಅರಸಿದ್ದಿ ಅವರಿಗೆ ಸೂಚಿಸಿದ್ದಾರೆ ಎಂದು ತಿಳಿದುಬಂದಿದೆ.
ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ನೇತೃತ್ವದಲ್ಲಿ ಜಿಲ್ಲೆಯ ಎಲ್ಲ ಪಕ್ಷಗಳ ಜನಪ್ರತಿನಿಧಿಗಳು ಹಾಗೂ ಕೊಪ್ಪಳ ಪರಿಸರ ಹಿತರಕ್ಷಣಾ ವೇದಿಕೆ ಪ್ರಮುಖರು ಮಂಗಳವಾರ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಅವರನ್ನು ಭೇಟಿಯಾದ ವೇಳೆ ಕಾರ್ಖಾನೆ ನಿಲ್ಲಿಸುವ ಭರವಸೆ ನೀಡಿದರು, ಆದರೆ ಇಷ್ಟು ದಿನ ಏನು ಮಾಡುತ್ತಿದ್ದಿರಿ ಎಂದು ಮುಖಂಡರನ್ನು ಪ್ರಶ್ನೆ ಮಾಡಿದರು ಎಂದು ಗೊತ್ತಾಗಿದೆ.
ಆಗ ನಿಯೋಗ ಕಾರ್ಖಾನೆ ವಿಸ್ತರಣೆ ಮಾಡಿದರೆ ಜಿಲ್ಲಾ ಕೇಂದ್ರಕ್ಕೆ ವಿಪರೀತ ದೂಳು, ಹೊಗೆ, ವಿಷಾನೀಲ ಬರುತ್ತದೆ. ಜನರ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುತ್ತದೆ. ಆದ್ದರಿಂದ ವಿಸ್ತರಣೆಗೆ ಅವಕಾಶ ಕೊಡಬಾರದು ಎಂದು ಮನವರಿಕೆ ಮಾಡಿಕೊಟ್ಟರು. ಇದಕ್ಕೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಈ ಕುರಿತು ತ್ವರಿತ ಕ್ರಮ ವಹಿಸುವಂತೆ ಸೂಚಿಸಿದ್ದಾರೆ.
ಅಲ್ಲದೆ ಸರ್ಕಾರದ ವತಿಯಿಂದ ಕೈಗಾರಿಕೆ ಸ್ಥಾಪನೆಯ ತಡೆಯುವ ಕುರಿತಂತೆ ಎಲ್ಲ ಕ್ರಮಗಳನ್ನು ಕೈಗೊಳ್ಳುವ ಕುರಿತಾಗಿಯೂ ಸರ್ವ ಪಕ್ಷಗಳ ನಿಯೋಗಕ್ಕೆ ಸಿಎಂ ಭರವಸೆ ನೀಡಿರುವುದು ತಿಳಿದು ಬಂದಿದೆ. ಕಳೆದ ಕೆಲ ತಿಂಗಳ ಹಿಂದೆ ಕೊಪ್ಪಳ ಸಮೀಪದಲ್ಲಿ ಬಿಎಸ್ಪಿಎಲ್ ಬೃಹತ್ ಉಕ್ಕು ಕೈಗಾರಿಕಾ ಘಟಕ ಈ ಹಿಂದೆ ಸರ್ಕಾರವೇ ಬಂಡವಾಳ ಹೂಡಿಕೆದಾರರ ಸಮಾವೇಶದಲ್ಲಿ ಒಡಂಬಡಿಕೆಗೆ ಒಪ್ಪಿಗೆ ನೀಡಿತ್ತು. ಇದು ಜಿಲ್ಲೆಯ ಜನರಲ್ಲಿ ಅಸಮಾಧಾನವನ್ನು ತರಿಸಿತು. ಕೊಪ್ಪಳದಲ್ಲಿ ಕೈಗಾರಿಕೆ ಸ್ಥಾಪನೆ ವಿರೋಧಿಸಿ ಹೋರಾಟಗಳು ನಡೆದು ನಂತರ ಶ್ರೀ ಗವಿಸಿದ್ದೇಶ್ವರ ಮಹಾಸ್ವಾಮೀಜಿಗಳ ನೇತೃತ್ವದಲ್ಲಿಯೇ ಹೋರಾಟ ಬಹುದೊಡ್ಡ ಸ್ವರೂಪವನ್ನು ಪಡೆದುಕೊಂಡಿತ್ತು. ಕೈಗಾರಿಕೆ ಸ್ಥಾಪನೆ ರದ್ದತಿ ಆದೇಶದ ಪ್ರತಿಯೊಂದಿಗೆ ಜಿಲ್ಲೆಗೆ ಆಗಮಿಸುವಂತೆ ಜಿಲ್ಲೆಯ ಎಲ್ಲ ಜನಪ್ರತಿನಿಧಿಗಳಿಗೆ ಮನವಿ ಮಾಡಿದರು.
ಹಾಗಾಗಿ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್ ತಂಗಡಗಿ ನೇತೃತ್ವದಲ್ಲಿ ಕೊಪ್ಪಳ ಜಿಲ್ಲೆಯ ಹಾಲಿ ಶಾಸಕರು, ಮಾಜಿ ಶಾಸಕರು ಸೇರಿದಂತೆ ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್ನ ಪಕ್ಷಗಳ ವಿವಿಧ ಮುಖಂಡರು ಒಳಗೊಂಡ ನಿಯೋಗ ಇಂದು ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಕೊಪ್ಪಳ ಜಿಲ್ಲೆಯಲ್ಲಿ ಬಿಎಸ್ಪಿಎಲ್ ಕೈಗಾರಿಕೆ ಸ್ಥಾಪನೆಗೆ ಜನ ವಿರೋಧ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ಯಾವುದೇ ಕಾರಣಕ್ಕೂ ಹೊಸ ಕೈಗಾರಿಕೆ ಸ್ಥಾಪನೆ ಮಾಡುವುದು ಬೇಡ ಎನ್ನುವ ಒಕ್ಕೋರಲಿನ ಮನವಿಯನ್ನ ಸಿಎಂ, ಡಿಸಿಎಂ ಹಾಗೂ ರಾಜ್ಯ ಕೈಗಾರಿಕೆ ಸಚಿವರಿಗೆ ಮನವಿ ಸಲ್ಲಿಸಿದ್ದರು. ಸರ್ಕಾರದಿಂದ ಸಕಾರಾತ್ಮಕ ಸ್ಪಂದನೆ ದೊರೆತಿದ್ದು ಜಿಲ್ಲೆ ಜನರಲ್ಲಿ ನೆಮ್ಮದಿ ತರಿಸಿದೆ. ಇದು ಮೊದಲ ಹೆಜ್ಜೆಯಾಗಿದ್ದು, ಇನ್ನಷ್ಟು ಶ್ರಮ ಮತ್ತು ಹೋರಾಟ ಮಾಡಬೇಕಿದೆ.
ಕಾರ್ಖಾನೆ ಆರಂಭಿಸಲು ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ಕೊಟ್ಟಿಲ್ಲ. ಜನರ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ ಎನ್ನುವ ಬಗ್ಗೆ ಮಾಧ್ಯಮಗಳಲ್ಲಿ ಪ್ರಕಟವಾದ ವರದಿ ಗಮನಿಸಿದ್ದೇನೆ. ಈ ಕುರಿತು ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ ಅವರೊಂದಿಗೆ ಸಭೆ ನಡೆಸುವೆ ಎಂದು ಸಿ.ಎಂ. ಹೇಳಿದ್ದಾರೆ.
ನಿಯೋಗದಲ್ಲಿ ಸಂಸದ ಕೆ. ರಾಜಶೇಖರ ಹಿಟ್ನಾಳ, ಮುಖ್ಯಮಂತ್ರಿ ಆರ್ಥಿಕ ಸಲಹೆಗಾರ ಬಸವರಾಜ ರಾಯರಡ್ಡಿ, ಮುಖ್ಯ ಸಚೇತಕ ದೊಡ್ಡನಗೌಡ ಪಾಟೀಲ, ಶಾಸಕರುಗಳಾದ ಕೆ.ರಾಘವೇಂದ್ರ ಹಿಟ್ನಾಳ, ಜನಾರ್ದನ ರೆಡ್ಡಿ, ವಿಧಾನ ಪರಿಷತ್ ಸದಸ್ಯರಾದ ಹೇಮಲತಾ ನಾಯಕ, ಶರಣಗೌಡ ಬಯ್ಯಾಪುರ, ಮುನಿರಾಬಾದ್ ಕಾಡಾ ಅಧ್ಯಕ್ಷ ಹಸನಸಾಬ್ ದೋಟಿಹಾಳ, ಮಾಜಿ ಶಾಸಕರಾದ ಕೆ. ಬಸವರಾಜ ಹಿಟ್ನಾಳ, ಕೆ. ಶರಣಪ್ಪ ಕರಿಯಣ್ಣ ಸಂಗಟಿ, ಜೆಡಿಎಸ್ ರಾಜ್ಯ ಕೋರ್ ಕಮಿಟಿ ಸದಸ್ಯ ಸಿ.ವಿ. ಚಂದ್ರಶೇಖರ್, ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯ ಡಾ. ಬಸವರಾಜ ಕ್ಯಾವಟರ್, ಮುಖಂಡರಾದ ವೀರೇಶ ಮಹಾಂತಯ್ಯನಮಠ, ಸಂತೋಷ ದೇಶಪಾಂಡೆ, ಶರಣಪ್ಪ ಸಜ್ಜನ, ಪ್ರಸನ್ನ ಗಡಾದ ಸೇರಿದಂತೆ ವಿವಿಧ ಪಕ್ಷಗಳ ನಾಯಕರು, ಸಂಘಟನೆಗಳ ಪ್ರಮುಖರು ಪಾಲ್ಗೊಂಡಿದ್ದರು.